ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು
ಬಳೆಗಾರ ಚೆನ್ನಯ್ಯ ಬಾಗಿಲಿಗೆ ಬಂದಿಹೆನು,
ಒಳಗೆ ಬರಲಪ್ಪಣೆಯೆ ದೊರೆಯೆ?
ನವಿಲೂರ ಮನೆಯಿಂದ ನುಡಿಯೊಂದ ತಂದಿಹೆನು -
ಬಳೆಯ ತೊಡಿಸುವುದಿಲ್ಲ ನಿಮಗೆ.
ಮುಡಿದ ಮಲ್ಲಿಗೆ ಅರಳು ಬಾಡಿಲ್ಲ, ರಾಯರೇ,
ತೌರಿನಲಿ ತಾಯಿ ನಗುತಿಹರು.
ಕುಡಿದ ನೀರಲುಗಿಲ್ಲ, ಕೊರಗದಿರಿ, ರಾಯರೇ -
ಅಮ್ಮನಿಗೆ ಬಳೆಯ ತೊಡಿಸಿದರು.
ಅಂದು ಮಂಗಳವಾರ ನವಿಲೂರ ಕೇರಿಯಲಿ
ಓಲಗದ ಸದ್ದು ತುಂಬಿತ್ತು;
ಬಳೆಯ ತೊಡಿಸಿದರಂದು ಅಮ್ಮನಿಗೆ ತೌರಿನಲಿ
ಅಂಗಳದ ತುಂಬ ಜನವಿತ್ತು .
ಸಿರಿಗೌರಿಯಂತೆ ಬಂದರು ತಾಯಿ ಹಸೆಮಣೆಗೆ,
ಸೆರಗಿನಲಿ ಕಣ್ಣೀರನೊರಸಿ;
ಸುಖದೊಳಗೆ ನಿಮ್ಮ ನೆನೆದರು ತಾಯಿ ಗುಣವಂತೆ,
ದೀಪದಲಿ ಬಿಡುಗಣ್ಣ ನಿಲಿಸಿ.
ಬೇಕಾದ ಹಣ್ಣಿಹುದು,
ಹೂವಿಹುದು ತೌರಿನಲಿ
ಹೊಸ ಸೀರೆ, ರತ್ನದಾಭರಣ
ತಾಯಿ ಕೊರಗುವರಲ್ಲಿ ನೀವಿಲ್ಲದೂರಿನಲಿ
ನಿಮಗಿಲ್ಲ ಒಂದು ಹನಿ ಕರುಣ.
ದಿನವಾದ ಬಸುರಿ ಉಸ್ಸೆಂದು ನಿಟ್ಟುಸಿರೆಳೆದು
ಕುದಿಯಬಾರದು, ನನ್ನ ದೊರೆಯೆ;
ಹಿಂಡಬಾರದು ದುಂಡುಮಲ್ಲಿಗೆಯ ದಂಡೆಯನು;
ಒಣಗಬಾರದು ಒಡಲ ಚಿಲುಮೆ.
ಮುಳಿಸು ಮಾವನ ಮೇಲೆ; ಮಗಳೇನ ಮಾಡಿದಳು?
ನಿಮಗೇತಕೀ ಕಲ್ಲುಮನಸು?
ಹೋಗಿ ಬನ್ನಿರಿ, ಒಮ್ಮೆ, ಕೈಮುಗಿದು
ಬೇಡುವೆನು
ಅಮ್ಮನಿಗೆ ನಿಮ್ಮದೇ ಕನಸು.
ಸಾಹಿತ್ಯ: ಕೆ.ಎಸ್. ನರಸಿಂಹಸ್ವಾಮಿ
ಚಿತ್ರಗಾರರು: ಗೋಪಾಲ ಖೆತಾಂಚಿ
(Artist: Gopal Khetanchi)
ಚಿತ್ರಗಾರರು: ಗೋಪಾಲ ಖೆತಾಂಚಿ
(Artist: Gopal Khetanchi)
ಸಂಗೀತ: ಸಿ.ಎಸ್. ಅಶ್ವಥ್
ಗಾಯನ: ಎಸ್. ಪಿ. ಬಾಲಸುಬ್ರಹ್ಮಣ್ಯಂ
ಕಾಮೆಂಟ್ಗಳು