ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಆಚಾರ್ಯ ವಿನೋಬಾ




 ಆಚಾರ್ಯ ವಿನೋಬಾ ಭಾವೆ


’ಭೂದಾನ’ ಚಳವಳಿಯ ಹರಿಕಾರರಾಗಿ ಜನಪರರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ತಪಸ್ವಿಯಾಗಿ ಬಾಳಿದವರು  ಆಚಾರ್ಯ  ವಿನೋಬಾ ಭಾವೆ. 

ವಿನೋಬಾ ಭಾವೆ ಮಹಾರಾಷ್ಟ್ರದ ಕೋಲಬಾ ಜಿಲ್ಲೆಯ ಗಾಗೋದೆ ಗ್ರಾಮದಲ್ಲಿ  1895ರ ಸೆಪ್ಟೆಂಬರ್ 11ರಂದು ಜನಿಸಿದರು. ಅವರ ಮೂಲ ಹೆಸರು ವಿನಾಯಕ್ ನರಹರಿ ಭಾವೆ. 

ವಿನೋಬಾ ಭಾವೆ ಬಾಲ್ಯದಲ್ಲಿಯೇ ವಿವಿಧ ಧರ್ಮಗಳ ಸಾರವನ್ನು ಅಧ್ಯಯನ ಮಾಡಿ ಅರಗಿಸಿಕೊಂಡಿದ್ದರು.  ಅವರಿಗೆ ಗಣಿತದಲ್ಲಿ ಅಪಾರ ಆಸಕ್ತಿ ಇತ್ತು.  1916ರಲ್ಲಿ ತಮ್ಮ ಇಂಟರ್ ಮೀಡಿಯೆಟ್ ಪರೀಕ್ಷೆಗಗಾಗಿ  ಮುಂಬೈಗೆ ಹೊರಟಿದ್ದ ವಿನೋಬಾ ಭಾವೆ ಅವರಿಗೆ ಮಹಾತ್ಮ ಗಾಂಧಿಯವರ ಬರಹವೊಂದು ಕಣ್ಣಿಗೆ ಬಿದ್ದು, ತಮ್ಮ ಓದು ಬರಹದ ಪ್ರಮಾಣ ಪತ್ರಗಳಿಗೆಲ್ಲ ಬೆಂಕಿಗೆ ಹಚ್ಚಿಬಿಟ್ಟರಂತೆ.    ತಮ್ಮ ಇಪ್ಪತ್ತೊಂದನೆಯ ವಯಸ್ಸಿನಲ್ಲಿ ಗಾಂಧೀಜಿಯವರ ಅನುಯಾಯಿಯಾಗುವುದರೊಂದಿಗೆ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಭಾವೆ ಅನಂತರ ಹಿಂತಿರುಗಿ ನೋಡಲಿಲ್ಲ.

ವಿನೋಬಾ ಭಾವೆ ಸಮರ್ಥ ಲೇಖಕರಾಗಿದ್ದರು.  1923 ರಲ್ಲಿ ’ಮಹಾರಾಷ್ಟ್ರ ಧರ್ಮ’ ಪತ್ರಿಕೆಯ ಸಂಪಾದಕರಾದರು.  ನಾಗಪುರದ ’ಧ್ವಜಸತ್ಯಾಗ್ರಹ'ದಲ್ಲಿ ತಿಂಗಳಾನುಗಟ್ಟಲೆ ಬಂಧಿತರಾದರು ಮತ್ತು ಕೇರಳದ ’ವೈಕೋಮ್ ಸತ್ಯಾಗ್ರಹ’ಕ್ಕೆ ಹೊರಟುನಿಂತರು.  ಇವೆಲ್ಲದರ ನಡುವೆಯೂ ನಿರಂತರ ಅಧ್ಯಯನಶೀಲರಾಗಿದ್ದ ಅವರು ಮರಾಠಿಯಲ್ಲಿ ಗೀತಾಭಾಷ್ಯ ಬರೆದರು.   ಉಪನಿಷತ್ತುಗಳಿಗೆ ವ್ಯಾಖ್ಯಾನ ಬರೆದರು.  ತಿಂಗಳುಗಟ್ಟಲೆ ಜೈಲಿನಲ್ಲಿದ್ದಾಗ  ತಮ್ಮ ಸಹಖೈದಿಗಳಿಗೆಲ್ಲ ಇವುಗಳ ಬಗ್ಗೆ  ಪ್ರವಚನ ನೀಡುತ್ತಿದ್ದರು.  ಕುರಾನ್ ಮತ್ತು ಬೈಬಲ್ಲಿನ ಬೋಧನೆಗಳನ್ನು ಸಹಾ ಪ್ರಕಟಿಸಿದರಲ್ಲದೆ, ಶಿಕ್ಷಣ ಮತ್ತ ಸ್ವರಾಜ್ಯಶಾಸ್ತ್ರದ ಕುರಿತಾದ ಗ್ರಂಥ ರಚನೆಯನ್ನೂ ಮಾಡಿದರು.

ವಿನೋಬಾ ಭಾವೆ ಒಬ್ಬ ಹಠವಾದಿ ಸತ್ಯಾಗ್ರಹಿ.  ಅಹಿಂಸಾ ಮಾರ್ಗದಲ್ಲಿ ಅಪ್ರತಿಮ ನಿಷ್ಠೆಯಿರಿಸಿದ್ದರು. ಉಪವಾಸ ಸತ್ಯಾಗ್ರಹದಲ್ಲಿ ಎತ್ತಿದ ಕೈಯಿ.  ಜಾತೀಯತೆಯ ಭೇದ ಅಳಿಸಿ ಎಲ್ಲರೂ ಸೌಹಾರ್ದದಿಂದ ಬಾಳಬೇಕೆಂಬ ಕನಸು ಕಟ್ಟಿ ಅದನ್ನು ನೆರವೇರಿಸಲು  ಹರಿಜನರೊಡನೆ ಮತ್ತು ವಿವಿಧ ಮತೀಯರೊಡನೆ ದೇವಾಲಯಗಳಿಗೆ ಪ್ರವೇಶಿಸಿ ಮತ್ತೆ ಮತ್ತೆ  ಸೆರೆವಾಸ ಅನುಭವಿಸಿದರು.  ಅವರ ಈ ಎಲ್ಲ  ಪ್ರಯತ್ನಗಳು ಎಲ್ಲರ ಮನ್ನಣೆಗಳಿಸಿ ಹೊಸ ಕ್ರಾಂತಿಗೆ ನಾಂದಿಯಾಯಿತು.

ಸಂತರಂತೆ ಬಾಳಿದ್ದ ವಿನೋಬಾರವರ ಅಂತಃಸತ್ತ್ವ ಬಹಳ ಪ್ರಭಾವಶಾಲಿಯಾಗಿತ್ತು, 1960ರಲ್ಲಿ ಚಂಬಲ್  ಕಣಿವೆಯ ಡಕಾಯಿತರು, 1972ರಲ್ಲಿ ವಿವಿಧ ಭಾಗದ ನೂರಾರು ಡಕಾಯಿತರು ಅವರಿಗೆ ಶರಣುಬಂದಿದ್ದು ಅದಕ್ಕೊಂದು ಉದಾಹರಣೆ. ಈ ಡಕಾಯಿತರೆಲ್ಲರೂ ಮುಂದೆ ಭಾವೆಯವರ ಸಹವಾಸದಲ್ಲಿ ಜೀವನ ಕಳೆದರು. 1955ರಲ್ಲಿ ’ಭೂದಾನ ಚಳುವಳಿ’ಗೆ ಚಾಲನೆ ನೀಡಿದ ಭಾವೆ ಅದನ್ನು ವ್ಯಾಪಕಗೊಳಿಸಿ ಅಸಂಖ್ಯ ಭೂದಾನಕ್ಕೆ ಪ್ರೇರಣೆ ನೀಡಿದರು.  ದೇಶದ ಉದ್ದಗಲಕ್ಕೂ ಕಾಲ್ನಡಿಗೆಯಲ್ಲಿ ಓಡಾಡಿ  ಸಹಸ್ರಾರು ಸಾಮಾಜಿಕ ಕಾರ್ಯಕರ್ತರಿಗೆ ಪ್ರೇರಣೆಯಾಗಿ ನಿಂತರು.  ಅವರು ಸಿರಿವಂತರಿಂದ ದಾನ ಸ್ವೀಕರಿಸಿ ಬಡಬಗ್ಗರಿಗಾಗಿ  ಹಸ್ತಾಂತರಿಸಿದ ಹಳ್ಳಿಗಳ ಸಂಖ್ಯೆ ಸಾವಿರಕ್ಕೂ ಹೆಚ್ಚು.  ಅವುಗಳಲ್ಲಿ ತಮಿಳುನಾಡು ಒಂದರಲ್ಲೇ ಅವರು ಸುಮಾರು 175 ಹಳ್ಳಿಗಳನ್ನು ಸಿರಿವಂತರಿಂದ ಸ್ವೀಕರಿಸಿ ಬಡಜನರಿಗೆ ಹಸ್ತಾಂತರಿಸಿದರು.  

ಆಚಾರ್ಯ ವಿನೋಬಾ ಅವರು ಬಹುಭಾಷಾ ಪಂಡಿತರಾಗಿದ್ದು ಮರಾಠಿ, ಹಿಂದಿ, ಉರ್ದು, ಇಂಗ್ಲಿಷ್, ಕನ್ನಡ ಭಾಷೆಗಳ ಪರಿಚಯ ಅವರಿಗಿತ್ತು.  ಕನ್ನಡ ಭಾಷೆಯ ಲಿಪಿ ಅವರನ್ನು  ಮೋಡಿ ಮಾಡಿತ್ತು.  ಅವರು  ಕನ್ನಡದ ಲಿಪಿಯನ್ನು 'ಲಿಪಿಗಳ ರಾಣಿ' ಎಂದು  ಶ್ಲಾಘಿಸುತ್ತಿದ್ದರು.

1958ರಲ್ಲಿ ವಿನೋಬಾ ಅವರು  ಸಲ್ಲಿಸಿದ ಸಮಾಜ ಸೇವೆಗಾಗಿ ಮ್ಯಾಗ್ಸೆಸೆ ಪ್ರಶಸ್ತಿ ಮತ್ತು 1983ರಲ್ಲಿ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಲಾಯಿತು.  ತುರ್ತುಪರಿಸ್ಥಿತಿ ಘೋಷಿಸಿದ್ದ ದಿನಗಳಲ್ಲೂ ಅವರು  ಇಂದಿರಾ ಗಾಂಧಿಯವರ ಆಡಳಿತಕ್ಕೆ ಬೆಂಬಲವಾಗಿ ನಿಂತದ್ದು ವಿವಾದಕ್ಕೆ ಕಾರಣವಾಗಿತ್ತು.  

1982ರ ವರ್ಷದಲ್ಲಿ ಅವರು ತೀವ್ರ ಅನಾರೋಗ್ಯದಿಂದಿದ್ದರೂ ಯಾವುದೇ ರೀತಿಯ ಔಷದೋಪಚಾರ ಸ್ವೀಕರಿಸಲು ಒಪ್ಪದೆ 1982ರ  ನವೆಂಬರ್ 15ರಂದು ನಿಧನರಾದರು. 


On the birth anniversary of Acharya Vinobha Bhavageethe

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ