ಭಾರತಕಥಾಮಂಜರಿ138
ಕುಮಾರವ್ಯಾಸನ
ಕರ್ಣಾಟ ಭಾರತ ಕಥಾಮಂಜರಿ
ಶಲ್ಯಪರ್ವ - ಮೊದಲನೆಯ ಸಂಧಿ
ಸೂ.
ರಾಯ ಕೇಳೈ ಕದನದಲಿ ರಾ
ಧೇಯನವಸಾನದಲಿ ಕೌರವ
ರಾಯದಳಪತಿಯಾಗಿ ಹೊಕ್ಕನು ಶಲ್ಯನಾಹವವ
ಹೇಳರೇ ಭೀಷ್ಮಾದಿ ಹಿರಿಯರು
ಮೇಲುದಾಯವ ಬಲ್ಲವರು ಹೆ
ಚ್ಚಾಳುತನದಲಿ ಹಿಗ್ಗಿಕಂಡಿರೆ ಜಯದ ಜಾರುಗಳ
ಮೇಲಣಾಹವದೊಳಗೆ ದೇಹವ
ಬೀಳುಕೊಂಡನು ಶಲ್ಯನಲ್ಲಿಂ
ಮೇಲೆ ದೊರೆಗೇನಾದುದೆಂಬುದನರಿಯೆ ನಾನೆಂದ ೧
ಮರುಳೆ ಸಂಜಯ ಗಾಳಿಯಲಿ ಕುಲ
ಗಿರಿಯ ಬೈಸಿಕೆ ಬಿಚ್ಚಿದಡೆ ಹುಲು
ಮೊರಡಿಗಳ ಬಿಗುಹೇನು ಬೀತುದು ಕರ್ಣನೊಡ್ಡವಣೆ
ಕುರುಪತಿಯ ಪಾಡೇನು ಮಾದ್ರೇ
ಶ್ವರನ ಮತ್ಸರವೇನು ಸಾಕಂ
ತಿರಲಿ ಸವರಿತೆ ಕೌರವಾನ್ವಯವೆಂದನಂಧನೃಪ ೨
ಬೇಯದೆನ್ನೆದೆ ಶೋಕವಹ್ನಿಯ
ಬಾಯಲಕಟಾ ಕರ್ಣ ಕೌರವ
ರಾಯನಳಿವಿನಲುಳಿವ ಪುತ್ರದ್ರೋಹಿ ಯಾರಿನ್ನು
ಸಾಯಿಸುವ ಸಾವಂಜಿತೆನಗೆ ಚಿ
ರಾಯು ತೊಡರಿಕ್ಕಿದೆನು ಮಾರ್ಕಂ
ಡೇಯ ಮುನಿಗೆಂದರಸ ಧೊಪ್ಪನೆ ಕೆಡೆದನವನಿಯಲಿ ೩
ಹದುಳಿಸೈ ರಾಜೇಂದ್ರ ನೀ ಬಿ
ತ್ತಿದ ವಿಷದ್ರುಮ ಫಲಿತವಾಯಿತು
ಬೆದರಲೇಕಿನ್ನನುಭವಿಸು ಸಾಕುಳಿದ ಮಾತೇನು
ಕದನದಲಿ ಸುತನಿಧಿಯ ಹೋಗಾ
ಡಿದೆ ನಿಜಾನ್ವಯ ಕಲ್ಪತರುವನು
ಮದಕರಿಗೆ ಮಾರಿದೆಯೆನುತ ನೆಗಹಿದನು ಭೂಪತಿಯ ೪
ಮಲಗಿಸಿದನೊರವೇಳ್ವ ನಯನ
ಸ್ಥಳವ ನೇವರಿಸಿದನು ಶೋಕಾ
ನಲನ ತಾಪಕೆ ತಂಪನೆರೆದನು ನೀತಿಮಯರಸದ
ಅಳಲ ಶ್ರವಮಾಡಿದೆ ನದೀಸುತ
ನಳಿವಿನಲಿ ಗುರು ಕರ್ಣ ಶಲ್ಯರ
ಕಳಿವಿನಲಿ ಕಟ್ಟಳಲ ಬಹಳಾಭ್ಯಾಸಿ ನೀನೆಂದ ೫
ಅಹುದು ಸಂಜಯ ಶೋಕಶಿಖಿ ನೆರೆ
ದಹಿಸಿತೆನ್ನನು ಬೆಂದ ವಸ್ತುಗೆ
ದಹನವುಂಟೇ ಎಂಬ ನಾಣ್ಣುಡಿ ನಮ್ಮೊಳಾದುದಲಾ
ಮಿಹಿರಸುತ ಪರಿಯಂತ ಕಥೆ ನಿ
ರ್ವಹಿಸಿ ಬಂದುದು ಶಲ್ಯಕೌರವ
ರೆಹಗೆ ನೆಗಳಿದರದನು ವಿಸ್ತರವಾಗಿ ಹೇಳೆಂದ ೬
ತೆಗೆದುದಾಚೆಯಲವರ ಬಲ ಜಗ
ದಗಲದುಬ್ಬಿನ ಬೊಬ್ಬೆಯಲಿ ಮೊರೆ
ಮುಗಿಲ ಮದದಂದದಲಿ ಮೊಳಗುವ ವಾದ್ಯರಭಸದಲಿ
ಬಿಗಿದ ಮೋನದ ಬೀತ ಹರುಷದ
ಹೊಗೆವ ಮೋರೆಯ ಹೊತ್ತುವೆದೆಗಳ
ದುಗುಡದೊಗ್ಗಿನ ನಮ್ಮ ಮೋಹರ ತೆಗೆದುದೀಚೆಯಲಿ ೭
ಸಿಡಿದು ಕರ್ಣನ ತಲೆ ಧರಿತ್ರಿಗೆ
ಕೆಡೆಯೆ ಧೊಪ್ಪನೆ ಮೂರ್ಛೆಯಲಿ ನೃಪ
ಕೆಡೆದು ಕಣ್ಮುಚ್ಚಿದನು ಶೋಕಜ್ವರದ ಢಗೆ ಜಡಿಯೆ
ಹಡಪಿಗರು ಚಾಮರದ ಚಾಹಿಯ
ರೊಡನೆ ನೆಲಕುರುಳಿದರು ಸಾರಥಿ
ಕಡಿಯಣದ ಕುಡಿನೇಣ ಕೊಂಡನು ತಿರುಹಿದನು ರಥವ ೮
ಬಂದು ಕರ್ಣನ ಹಾನಿ ಕೌರವ
ವೃಂದವನು ವೇಢೈಸಿತೇ ಹಾ
ಯೆಂದು ಕೃಪಗುರುಸುತರು ರಥವನು ಬಿಟ್ಟು ಸೂಠಿಯಲಿ
ತಂದು ಬಾಚಿಸಿದರಸನಿರವೆಂ
ತೆಂದುಸುರನಾರೈದು ವಿಧಿಯನು
ನಿಂದಿಸಿದರವಧಾನ ಜೀಯವಧಾನ ಜೀಯೆನುತ ೯
ತಳಿತಳಿದು ಪನ್ನೀರನಕ್ಷಿಗೆ
ಚಳೆಯವನು ಹಿಡಿದೆತ್ತಿ ಗುರುಸುತ
ಮಲಗಿಸಿದಡೇನಯ್ಯ ಕರ್ಣ ಎನುತ್ತ ಕಂದೆರೆದು
ಘಳಿಲನೆದ್ದನು ಕರ್ಣ ತೆಗೆಸೈ
ದಳವನಿರುಳಾಯ್ತೆಂದು ಶೋಕದ
ಕಳವಳದಲರೆಮುಚ್ಚುಗಣ್ಣಲಿ ಮತ್ತೆ ಮೈಮರೆದ ೧೦
ರಾಯ ಹದುಳಿಸು ಹದುಳಿಸಕಟಾ
ದಾಯಿಗರಿಗೆಡೆಗೊಟ್ಟೆಲಾ ನಿ
ರ್ದಾಯದಲಿ ನೆಲ ಹೋಯ್ತು ಭೀಮನ ಭಾಷೆ ಸಂದುದಲಾ
ವಾಯುಜನ ಜಠರದಲಿ ತೆಗೆಯಾ
ಜೀಯ ನಿನ್ನನುಜರನು ಪಾರ್ಥನ
ಬಾಯಲುಗಿ ಸೂತಜನನೆಂದರು ಜರೆದು ಕುರುಪತಿಯ ೧೧
ಏನು ಗುರುಸುತ ಮಡಿದನೇ ತ
ನ್ನಾನೆ ಬವರದಲಕಟ ಕುಂತೀ
ಸೂನುವೇಕೈ ತಪ್ಪ ಮಾಡಿದನೇ ಮಹಾದೇವ
ಭಾನುಸನ್ನಿಭ ಸರಿದನೇ ತ
ಪ್ಪೇನು ಪಾರ್ಥನ ಬಸುರಲೆನ್ನ ನಿ
ಧಾನವಿದ್ದುದು ತೆಗೆವೆನೈಸಲೆಯೆಂದು ಕಂದೆರೆದ ೧೨
ತಾಪವಡಗಿತು ಮನದ ಕಡುಹಿನ
ಕೋಪ ತಳಿತುದು ಭೀಮ ಪಾರ್ಥರ
ರೂಪು ಮುಖದಲಿ ಕರ್ಣ ದುಶ್ಯಾಸನರ ಕಲ್ಪಿಸಿದ
ಭೂಪ ಕೇಳೈ ಪಾಳಯಕೆ ಕುರು
ಭೂಪ ಬಂದನು ನಾಳೆ ಕರ್ಣೋ
ತ್ಥಾಪನವಲಾ ಎನುತ ಹೊಕ್ಕನು ಭದ್ರಮಂಟಪವ ೧೩
ಶಕುನಿ ಕೃಪ ಗುರುಸೂನು ಕೃತವ
ರ್ಮಕ ಸುಕೇತು ಸುಶರ್ಮ ಸಮಸ
ಪ್ತಕರು ಮಾದ್ರೇಶ್ವರ ಸುಬಾಹು ಸುನಂದ ಚಿತ್ರರಥ
ಸಕಲ ಸುಭಟರು ಸಹಿತ ದಳನಾ
ಯಕರು ಬಂದರು ಕರ್ಣಹಾನಿ
ಪ್ರಕಟ ಕಳಿತ ಶಿರೋವಕುಂಠನ ವೈಮನಸ್ಯದಲಿ ೧೪
ಹಿಮದ ಹೊಯ್ಲಲಿ ಸೀದು ಸಿಕ್ಕಿದ
ಕಮಲವನದಂದದಲಿ ಹತವಿ
ಕ್ರಮದಕೀರ್ತಿಯ ಬಹಳಭಾರಕೆ ಬಳುಕಿದಾನನದ
ಸುಮುಖತಾವಿಚ್ಛೇದ ಕಲುಷ
ಸ್ತಿಮಿತರಿರವನು ಕಂಡು ನಾಳಿನ
ಸಮರಕೇನುದ್ಯೋಗವೆಂದನು ಕೃಪನ ಗುರುಸುತನ ೧೫
ಅರಸ ಕರ್ಣಚ್ಛೇದವೇ ಜಯ
ಸಿರಿಯ ನಾಸಾಚ್ಛೇದವಿನ್ನರ
ವರಿಸದಿರು ಹೊಯ್ದಾಡಿ ಹೊಗಳಿಸು ಬಾಹುವಿಕ್ರಮವ
ಗುರುನದೀಸುತರಳಿದ ಬಳಿಕೀ
ಧರೆಗೆ ನಿನಗಸ್ವಾಮ್ಯ ಕರ್ಣನ
ಮರಣದಲಿ ನೀನರ್ಧದೇಹನು ಭೂಪ ಕೇಳೆಂದ ೧೬
ಆ ವೃಕೋದರ ನರರೊಳಂತ
ರ್ಭಾವ ದುಶ್ಶಾಸನಗೆ ತನ್ನಯ
ಜೀವಸಖಗಾ ಭೀಮ ಪಾರ್ಥರ ಮರಣಸಿದ್ಧಿಯಲಿ
ಕೈವಿಡಿಯಲೇ ಕರ್ಣನಿಹನೆಂ
ದಾವು ನಿಶ್ಚಯಿಸಿದೆವು ಕರ್ಣನ
ಸಾವ ನಾಳಿನೊಳರಿವೆನೆಂದನು ನಿನ್ನ ಮಗ ನಗುತ ೧೭
ನಾವು ಹೊಯ್ದಾಡುವೆವು ಭುಜಸ
ತ್ವಾವಲಂಬವ ತೋರುವೆವು ಕ
ರ್ಣಾವಸಾನವ ಕಂಡು ಬಳಿಕುಗುಳುವೆವೆ ತಂಬುಲವ
ನೀವು ಸೇನಾಪತ್ಯವನು ಸಂ
ಭಾವಿಸಿರೆ ಸಾಕಿನ್ನು ಮಿಗಿಲಾ
ದೈವಕೃತ ಪೌರುಷವ ನಾಳಿನೊಳರಿಯಬಹುದೆಂದ ೧೮
ಧರಣಿಪತಿ ಚಿತ್ತೈಸು ಸೇನಾ
ಧುರವನೀವುದು ಮದ್ರಭೂಪತಿ
ಗೆರವಲಾ ಜಯಲಕ್ಷ್ಮಿ ಬಳಿಕಾ ಪಾಂಡುತನಯರಿಗೆ
ಸುರನದೀಜ ದ್ರೋಣ ರಾಧೇ
ಯರಿಗೆ ಸರಿಮಿಗಿಲಿಂದು ಮಾದ್ರೇ
ಶ್ವರನುಳಿಯೆ ದೊರೆಯಾರು ದಿಟ್ಟರು ನಮ್ಮ ಥಟ್ಟಿನಲಿ ೧೯
ನೀವು ಕಟಕಾಚಾರ್ಯಪುತ್ರರು
ನೀವಿರಲು ಕೃಪನಿರಲು ದಳವಾಯ್
ನಾವಹೆವೆ ನೀವಿಂದು ತೇಜೋದ್ವಯದಲಧಿಕರಲೆ
ನಾವು ತರುವಾಯವರೆನಲು ಜಯ
ಜೀವಿಗಳು ನೀವನ್ಯಗುಣಸಂ
ಭಾವಕರಲಾ ಎಂದನಶ್ವತ್ಥಾಮ ಶಲ್ಯಂಗೆ ೨೦
ಉಚಿತವಿತರೇತರಗುಣಸ್ತುತಿ
ರಚನೆ ಗುಣಯುಕ್ತರಿಗೆ ವಿಜಯೋ
ಪಚಿತ ರಣನಾಟಕಕೆ ಜವನಿಕೆಯಾಯ್ತಲೇ ರಜನಿ
ಅಚಲ ಮೂರರ ಪೈಸರದ ಬಲ
ನಿಚಯ ನಮ್ಮದು ವೀರ ಸುಭಟ
ಪ್ರಚಯ ಮುಖ್ಯರ ಮಾಡಿಯೆಂದನು ಕೃಪನು ಕುರುಪತಿಗೆ ೨೧
ಸುರನದೀಜ ದ್ರೋಣ ಕೃಪರೀ
ಕುರುಬಲಕೆ ಕಟ್ಟೊಡೆಯರವರಿ
ಬ್ಬರ ಪರೋಕ್ಷದಲಾರವಿಲ್ಲಿಯ ಹಾನಿವೃದ್ಧಿಗಳು
ಗುರುಸುತನೊ ಶಲ್ಯನೊ ಚಮೂಮು
ಖ್ಯರನು ನೀವೇ ಬೆಸಸಿಯೆಂದನು
ಧರಣಿಪತಿ ಕೇಳೈ ಕೃಪಾಚರ್ಯಂಗೆ ಕುರುರಾಯ ೨೨
ಆದಡಾ ಭೀಷ್ಮಾದಿ ಸುಭಟರು
ಕಾದಿ ನೆಗ್ಗಿದ ಕಳನ ಹೊಗುವಡೆ
ಕೈದುಕಾರರ ಕಾಣೆನೀ ಮಾದ್ರೇಶ ಹೊರಗಾಗಿ
ಈ ದುರಂತರ ಸಮರಜಯ ನಿನ
ಗಾದಡೊಳ್ಳಿತು ಶಲ್ಯನಲಿ ಸಂ
ಪಾದಿಸಿರೆ ಸೇನಾಧಿಪತ್ಯವನರಸ ಕೇಳೆಂದ ೨೩
ತರಿಸಿ ಮಂಗಳವಸ್ತುಗಳನಾ
ದರಿಸಿ ಭದ್ರಾಸನದಲೀತನ
ನಿರಿಸಿ ನೃಪ ವಿಸ್ತರಿಸಿದನು ಮೂರ್ಧಾಭಿಷೇಚನವ
ಮೊರೆವ ವಾದ್ಯದ ಸಿಡಿಲ ಧರಣೀ
ಸುರರ ಮಂತ್ರಾಕ್ಷತೆಯ ಮಳೆಗಳೊ
ಳಿರುಳನುಗಿದವು ಮುಕುಟಮಣಿರಾಜಿಗಳ ಮಿಂಚುಗಳು ೨೪
ಆದುದುತ್ಸವ ಕರ್ಣಮರಣದ
ಖೇದವಕ್ಕಿತು ಹಗೆಗೆ ಕಾಲ್ವೊಳೆ
ಯಾದ ವೀರರಸಾಬ್ಧಿ ನೆಲೆದಪ್ಪಿತ್ತು ನಿಮಿಷದಲಿ
ಬೀದಿವರಿದುದು ಬಿಂಕ ನನೆಕೊನೆ
ವೋದುದಾಶಾಬೀಜ ಲಜ್ಜೆಯ
ಹೋದ ಮೂಗಿಗೆ ಕದಪ ಹೊಯ್ದನು ನಿನ್ನ ಮಗನೆಂದ ೨೫
ಕಾಣಿಕೆಯನಿತ್ತಖಿಳ ಸುಭಟ
ಶ್ರೇಣಿ ಕಂಡುದು ನುಡಿಯ ಹಾಣಾ
ಹಾಣಿಗಳ ಭಾಷೆಗಳ ಹಕ್ಕಲು ವೀರರುಕ್ಕುಗಳ
ಪ್ರಾಣಚುಳಕೋದಕದ ಚೇಷ್ಟೆಯ
ಹೂಣಿಗರು ವಿಜಯಾಂಗನೋಪ
ಕ್ಷೀಣಮಾನಸರೊಪ್ಪಿದರು ಕುರುಪತಿಯ ಪರಿವಾರ ೨೬
ಪತಿಕರಿಸಿದೈ ವೀರಸುಭಟ
ಪ್ರತತಿಮಧ್ಯದಲೆಮ್ಮನಹಿತ
ಚ್ಯುತಿಗೆ ಸಾಧನವೆಂದು ನಿಜಸೇನಾಧಿಪತ್ಯದಲಿ
ಕೃತಕವಿಲ್ಲದೆ ಕಾದುವೆನು ಯಮ
ಸುತನೊಡನೆ ಜಯಸಿರಿಗೆ ನೀನೇ
ಪತಿಯೆನಿಸಿ ತೋರಿಸುವೆನೆಂದನು ಶಲ್ಯ ಕುರುಪತಿಗೆ ೨೭
ಉಬ್ಬಿದನಲೈ ಮಧುರವಚನದ
ಹಬ್ಬದಲಿ ನಿನ್ನಾತನಿತ್ತಲು
ತುಬ್ಬಿನವದಿರು ತಂದು ಬಿಸುಟರು ನಿಮ್ಮ ಪಾಳೆಯದ
ಸರ್ಬ ವೃತ್ತಾಂತವನು ಗಾಢದ
ಗರ್ಭ ಮುರಿದುದು ಕೃಷ್ಣರಾಯನ
ನೆಬ್ಬಿಸಿದನಿರುಳವನಿಪತಿ ಬಿನ್ನೈಸಿದನು ಹದನ ೨೮
ದೇವ ಚಿತ್ತೈಸಿದಿರೆ ಬೊಪ್ಪನ
ಭಾವನನು ಸೇನಾಧಿಪತ್ಯದ
ಲೋವಿದರಲೇ ಶಲ್ಯ ಮಾಡಿದ ಭಾಷೆಯವರೊಡನೆ
ಆವನಂಘೈಸುವನೊ ಪಾರ್ಥನೊ
ಪಾವಮಾನಿಯೊ ನಕುಲನೋ ಸಹ
ದೇವನೋ ತಾನೋ ನಿದಾನಿಸಲರಿಯೆ ನಾನೆಂದ ೨೯
ಕಲಹವೆನ್ನದು ದಳಪತಿಗೆ ತಾ
ನಿಲುವೆನೆಂದನು ಭೀಮನೆನ್ನನು
ಕಳುಹಿ ನೋಡೆಂದನು ಧನಂಜಯನೆಮ್ಮ ಮಾವನಲಿ
ಸಲುಗೆಯೆನಗೆಂದನು ನಕುಲನೆ
ನ್ನೊಲವಿನರ್ತಿಯಿದೆನ್ನ ಕಳುಹಿದ
ಡುಳುಹಿದವರೆಂದೆರಗಿದನು ಸಹದೇವನಾ ಹರಿಗೆ ೩೦
ಹರಿಯದರ್ಜುನನಿಂದ ಭೀಮನ
ನೆರವಣಿಗೆ ನೋಯಿಸದು ನಕುಲನ
ಹೊರಿಗೆಯೊದಗದು ಸೈರಿಸದು ಸಹದೇವನಾಟೋಪ
ಇರಿವಡಾ ಮಾದ್ರೇಶನನು ನೆರೆ
ಮುರಿವಡೆಯು ನಿನಗಹುದು ನಿನ್ನನು
ತರುಬಿದವರೇ ಕಷ್ಟರೆಂದನು ನಗುತ ಮುರವೈರಿ ೩೧
ಲೇಸನಾಡಿದೆ ಕೃಷ್ಣ ಶಲ್ಯಂ
ಗೀಸು ಬಲುಹುಂಟಾದಡನುಜರು
ಘಾಸಿಯಾದರು ಹಿಂದೆ ಭೀಷ್ಮಾದಿಗಳ ಬವರದಲಿ
ಈ ಸಮರಜಯವೆನಗೆ ನಾಳಿನೊ
ಳೈಸಲೇ ನಳ ನಹುಷ ಭರತ ಮ
ಹೀಶ ವಂಶೋತ್ಪನ್ನ ತಾನೆಂದನು ಮಹೀಪಾಲ ೩೨
ತಾಯಿ ಹೆರಳೇ ಮಗನ ನೀನನು
ನಾಯಕನೆ ಲೋಕೈಕವೀರರ
ತಾಯಲಾ ನಿಮ್ಮವ್ವೆಯಾ ಮೊಲೆವಾಲ ಬಲುಹಿನಲಿ
ರಾಯ ನೀ ಕ್ಷತ್ರಿಯನು ಸೇಸೆಯ
ತಾಯೆನುತ ತೂಪಿರಿದು ಕಮಲದ
ಳಾಯತಾಂಬಕನಪ್ಪಿಕೊಂಡನು ಧರ್ಮನಂದನನ ೩೩
ಸಂದವೈ ಹದಿನೇಳು ರಾತ್ರಿಗ
ಳಿಂದಿನಿರುಳಾ ಸೇನೆ ನಿರ್ಭಯ
ದಿಂದ ನಿದ್ರಾವ್ಯಸನನಿರ್ಭರ ಪೂರ್ಣಹರುಷದಲಿ
ಸಂದುದೀ ನಿನ್ನವರು ರಾಧಾ
ನಂದನ ವ್ಯಪಗಮನ ನಷ್ಟಾ
ನಂದವಿಹ್ವಲಕರಣರಿದ್ದರು ಭೂಪ ಕೇಳೆಂದ ೩೪
ಆ ಶಿಖಂಡಿಯ ತೋರಿ ಸರಳಿನ
ಹಾಸಿಕೆಯಲೊಬ್ಬನನು ಮಾತಿನ
ವಾಸಿಯಿಂದೊಬ್ಬನನು ಮುನ್ನಿನ ಕುಲವನೆಚ್ಚರಿಸಿ
ಘಾಸಿ ಮಾಡಿದನೊಬ್ಬನನು ಧರ
ಣೀಶ ಚೇಷ್ಟೆಯಲೊಬ್ಬನನು ಕೃಪೆ
ಯೇಸು ಘನವೋ ವೀರನಾರಾಯಣಗೆ ಭಕ್ತರಲಿ ೩೫
ಸಂಕ್ಷಿಪ್ತ ಭಾವ
Lrphks Kolar
ಸೇನಾಪತಿಯಾಗಿ ಶಲ್ಯನ ನೇಮಕ
ಇಲ್ಲಿ ಸಂಜಯ ಮೊದಲಿಗೇ ಶಲ್ಯನ ಅವಸಾನವನ್ನು ಹೇಳಿ ಆಮೇಲೆ ವಿವರಗಳನ್ನು ಹೇಳತೊಡಗುತ್ತಾನೆ. ನಂತರ ದೊರೆಯ ಬಗ್ಗೆ ತಿಳಿಯದೆನ್ನಲು ಧೃತರಾಷ್ಟ್ರನು ನಡೆದುದನ್ನು ಹೇಳು ಎಂದನು.
ಕರ್ಣನ ಸಾವಿನ ಸುದ್ದಿಯು ಧೃತರಾಷ್ಟ್ರನ ಮನವನ್ನೂ ಕದಡಿತು. ಧೊಪ್ಪನೆ ನೆಲಕ್ಕೆ ಬಿದ್ದನು. ತನ್ನ ಮಗನಿಗೆ ಇನ್ನು ಯಾರೂ ಉಳಿದಿಲ್ಲವೆಂದು ಶೋಕಿಸಿದನು. ಅವನನ್ನು ಸಂತೈಸಿ, ಕಣ್ಣೀರನ್ನು ಒರೆಸಿ ನೀನು ಬಿತ್ತಿದ ಬೀಜದ ಫಲವನ್ನು ನೀನು ಅನುಭವಿಸಲೇಬೇಕು. ಈಗ ಶೋಕಿಸಿದರೆ ಏನು ಪ್ರಯೋಜನ ಎಂದು ಸಂಜಯನು ನುಡಿದನು. ಮುಂದಿನ ಸಂಗತಿಗಳನ್ನು ಹೇಳಲು ತೊಡಗಿದನು.
ಆ ಪಕ್ಷದವರಲ್ಲಿ ವಾದ್ಯ ರಭಸವಾದರೆ ಈ ಕಡೆ ಮೌನ. ದುರ್ಯೋಧನನು ಬಹುವಾಗಿ ಶೋಕಿಸಿದನು. ಸಾರಥಿಯು ಪಾಳೆಯದತ್ತ ರಥವನ್ನು ತಿರುಗಿಸಿದನು. ಎಲ್ಲರೂ ಬಂದರು. ಗುರುಸುತನು ರಾಜನನ್ನು ಉಪಚರಿಸಿದನು. ಕರ್ಣಾ ಎಂದು ಎಚ್ಚರಗೊಂಡು ಮತ್ತೆ ಮೈಮರೆದನು. ಬಹು ವಿಧವಾಗಿ ಅವನನ್ನು ಎಚ್ಚರಿಸಿ ಸಂತೈಸಿದರು. ನಾಳಿನ ಯುದ್ಧದ ಬಗ್ಗೆ ಯೋಚಿಸಲು ಸಭೆ ಸೇರಿತು. ಶಕುನಿ, ಕೃಪ, ಕೃತವರ್ಮ, ಗುರುಸುತ, ಸುಶರ್ಮ ಮೊದಲಾದ ಪ್ರಮುಖರು ಸೇರಿದರು. ನಾಳಿನ ಯುದ್ಧಕ್ಕೆ ಏನು ಮಾಡುವುದೆನ್ನಲು ಗುರುಸುತನು ಕರ್ಣನನ್ನು ಕಳೆದುಕೊಂಡ ನೀನು ಅರ್ಧಶರೀರಿಯಾದೆಯೆಂದನು. ಆಗ ದುರ್ಯೋಧನನು ಎಲ್ಲಿಲ್ಲದ ಶೌರ್ಯವನ್ನು ತಂದುಕೊಂಡು ನಾಳಿನ ಬವರದಲ್ಲಿ ಸೇಡು ತೀರಿಸುವೆನೆಂದನು.
ಸೇನಾಪತಿ ಪಟ್ಟವನ್ನು ಮದ್ರೇಶ ಶಲ್ಯನಿಗೆ ಕಟ್ಟಬೇಕು ಎಂದು ಎಲ್ಲರೂ ಸೂಚಿಸಿದರು. ನೀವೆಲ್ಲರೂ ಇರಲು ನನಗೇಕೆ? ನಾನು ಹೊರಗಿನವನೆನ್ನಲು ಗುರುತನಯನು ಗುಣದಲ್ಲಿ, ವಯಸ್ಸಿನಲ್ಲಿ ಹಿರಿಯನೆಂದು ಒಪ್ಪಿಟ್ಟನು. ರಾಯನು ಕೃಪಾಚಾರ್ಯರನ್ನು ಶಲ್ಯ ಅಥವಾ ಗುರುಸುತರಲ್ಲಿ ಯಾರನ್ನು ಸೇನಾಪತಿ ಮಾಡಬಹುದೆನ್ನಲು ಅವರೂ ಶಲ್ಯನನ್ನೇ ಸೂಚಿಸಿದರು. ಮಂಗಳದ್ರವ್ಯಗಳನ್ನು ತರಿಸಿ ಅಭಿಷೇಕ ಮಾಡಿದರು. ಇದಕ್ಕೆ ಪ್ರತಿಯಾಗಿ ತಾನು ತನ್ನ ಸಾಮರ್ಥ್ಯವನ್ನು ತೋರಿಸುವೆನೆಂದನು ಶಲ್ಯ. ಇದೆಲ್ಲ ಸಂಗತಿ ಪಾಂಡವರಿಗೆ ತಲುಪಿತು.
ಈ ಬಾರಿ ಶಲ್ಯನನ್ನು ಎದುರಿಸುವವರು ಯಾರು ಎಂದು ಚರ್ಚಿಸಿ ಕೊನೆಗೆ ಕೃಷ್ಣನ ಸೂಚನೆಯಂತೆ ಧರ್ಮಜನಿಗೆ ಅವಕಾಶ ನೀಡಲಾಯಿತು. ಉಳಿದವರು ಬೆಂಬಲಕ್ಕೆ ನಿಂತರು. ಹದಿನೇಳು ರಾತ್ರಿಗಳು ಮುಗಿದಿವೆ. ಶಿಖಂಡಿಯನ್ನು ತೋರಿಸಿ ಭೀಷ್ಮನನ್ನು ಸರಳ ಹಾಸಿಗೆಗೆ; ಪುತ್ರವ್ಯಾಮೋಹವನ್ನು ಬಳಸಿ ಗುರುಗಳನ್ನು ಸ್ವರ್ಗಕ್ಕೆ,; ಕುಲದ , ಜನನದ ಮೂಲವನ್ನು ತಿಳಿಸಿ ಕರ್ಣನನ್ನು ಕೊನೆ ಕಾಣಿಸಿದ ಕೃಷ್ಣಾ, ನಿನ್ನ ಭಕ್ತರ ಮೇಲೆ ನಿನಗೆಷ್ಟು ಕೃಪೆಯೆಂದು ನಮಿಸಿಹನಿಲ್ಲಿ ಕುಮಾರವ್ಯಾಸ.
ಕಾಮೆಂಟ್ಗಳು