ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಸಾರಾ ಅಬೂಬಕ್ಕರ್

 


ಸಾರಾ ಅಬೂಬಕ್ಕರ್


ಸಾರಾ ಅಬೂಬಕ್ಕರ್  ಕನ್ನಡದ ಪ್ರಖ್ಯಾತ ಲೇಖಕಿ. 

ಸಾರಾ ಅಬೂಬಕ್ಕರ್ 1936ರ  ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್.  ತಾಯಿ ಚೈನಾಬಿ. ಸಾರಾ.  ಅವರ ಪ್ರಾಥಮಿಕ ವಿದ್ಯಾಭ್ಯಾಸ ಹುಟ್ಟಿದೂರಿನಲ್ಲೇ ನೆರವೇರಿತು.  ಮುಂದೆ ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ. ಅರಾಬಿಕ್ ಕಲಿತಿದ್ದ ಅಜ್ಜಿ ಹೇಳುತ್ತಿದ್ದ ಕಥೆಗಳಿಂದ ಆಕರ್ಷಿತರಾಗಿ ಸಾಹಿತ್ಯದಲ್ಲಿ ಏನಾದರೂ ಸಾಧಿಸಬೇಕೆಂಬ ಆಶಯ ಅವರಿಗೆ ಬಾಲ್ಯದಲ್ಲೇ ಮೂಡಿಬಂದಿತ್ತು.

ಎಂಜನಿಯರ್ ಆಗಿದ್ದ ಅಬೂಬಕ್ಕರ್‌ ಅವರೊಡನೆ ಸಾರಾ ಅವರ ವಿವಾಹ ಏರ್ಪಟ್ಟು ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾರಾ ಅವರು ಶಿವರಾಮ  ಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರು ಹೋಗಿ ಸದಾ ಓದಿನಲ್ಲಿ ಮಗ್ನರಾಗಿರುತ್ತಿದ್ದರು. ಮನೋವಿಜ್ಞಾನದ ಬಗ್ಗೆ ತ್ರಿವೇಣಿಯವರು ಬರೆದ ಕಾದಂಬರಿಗಳು ಸಾರಾ ಅವರಲ್ಲಿ  ಆಕರ್ಷಣೆ ಹುಟ್ಟಿಸಿದವು. ಬದುಕುತ್ತಿದ್ದ ಸುತ್ತಮುತ್ತಲಿನ ಪರಿಸರದಲ್ಲಿ ಮನೋವ್ಯಾಕುಲತೆಗೊಳಗಾಗುತ್ತಿದ್ದ ಬಹಳಷ್ಟು ಸಹ ಧರ್ಮೀಯರ ಕುರಿತು ಅವರ ಮನ ನಿರಂತರವಾಗಿ ಮಿಡಿಯುತ್ತಿತ್ತು.  ತಲಾಕ್ ಸಂಪ್ರದಾಯ, ಮಕ್ಕಳಾದ ನಂತರದ ಅಸಹನೀಯ ಬದುಕು ಇವೆಲ್ಲಾ ಅವರನ್ನು ಅಪಾರವಾಗಿ  ಕಾಡುತ್ತಿದ್ದವು. 

ಅಣ್ಣ ತಂದುಕೊಡುತ್ತಿದ್ದ ವೈಕಂ ಮಹಮದ್ ಬಷೀರ್‌ ಅವರ ಕಾದಂಬರಿಗಳ ಓದಿನ ಪ್ರಭಾವದಿಂದ ಅವರಲ್ಲಿ  ಬರೆಯಬೇಕೆಂಬ ಅಂತರಾಳದ ಒತ್ತಡ ನಿರಂತರವಾಗಿ ಹೊರಹೊಮ್ಮುತ್ತಿತ್ತು.  ಹಲವಾರು ವರ್ಷ ಸಾಮಾಜಿಕ ಸಮಸ್ಯೆಗಳ ಮಥನದಿಂದಾಗಿ  ಎಂ.ಕೆ.ಇಂದಿರಾ ಅವರಂತೆ ನಲವತ್ತು ದಾಟಿದ ನಂತರ ಸಾರಾ ಅಬೂಬಕ್ಕರ್ ಬರೆಯಲು ಪ್ರಾರಂಭಿಸಿದರು. ಹೀಗೆ ಅವರು ಬರೆದ  ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಈ ಕಥೆಯಲ್ಲಿ ಹೊರಹೊಮ್ಮಿದ ವಾಸ್ತವಿಕ ಬದುಕಿನ ಚಿತ್ರಣ ಮತ್ತು ಧರ್ಮದ ಕಟ್ಟುಪಾಡುಗಳಲ್ಲಿ  ಶೋಷಿತಗೊಂಡ ಮಹಿಳೆಯರ ಧ್ವನಿಗಳು ಅಸಂಖ್ಯಾತ ಓದುಗರ ಹೃದಯವನ್ನು ತಟ್ಟಿ  ಈ ಕಾದಂಬರಿ ಎಲ್ಲೆಡೆಯಿಂದ ಮೆಚ್ಚುಗೆ ಪಡೆಯಿತು. 

ಆ  ನಂತರದಲ್ಲಿ ಸಾರಾ ಅವರು ಬರೆದ ಇತರ  ಹಲವಾರು ಕಾದಂಬರಿಗಳೆಂದರೆ  ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ (ಸುಳಿಯಲ್ಲಿ ಸಿಕ್ಕವರು ಕೃತಿಯ ಭಾಗ-೨), ತಳ ಒಡೆದ ದೋಣಿ, ಪಂಜರ ಮುಂತಾದವು. 

ಸಾರಾ ಅಬೂಬಕ್ಕರ್ ಅವರ ಕಥಾ ಸಂಕಲನಗಳಲ್ಲಿ ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ಖೆಡ್ಡ ಮುಂತಾದವು ಸೇರಿವೆ.  

ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು ಮುಂತಾದುವು ಬಾನುಲಿ ನಾಟಕಗಳು.

ಅವರ ಲೇಖನಗಳ ಸಂಗ್ರಹ ಲೇಖನ ಗುಚ್ಛ. ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ ಅನುವಾದಿತ ಕಾದಂಬರಿಗಳು. 'ಐಷಾರಾಮದಲ್ಲಿ'  ಪ್ರವಾಸಕಥನ.

ಸಾರಾ ಅಬೂಬಕ್ಕರ್ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ  ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಮತ್ತು ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ   ಮುಂತಾದ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿದ್ದವು. 

ತಮ್ಮಲ್ಲಿ ಮೂಡಿಬಂದ ಮುಕ್ತ ಮಾನೋಭಾವದ ಬಗ್ಗೆ ಸಾರಾ ಅಬೂಬಕ್ಕರ್ ಹೀಗೆ ಹೇಳುತ್ತಿದ್ದರು: “ನನ್ನ ಅಜ್ಜ ಪುಡಿಯಾಪುರ ಮಹಮದ್ ಅವರು ಕೇರಳದ ಕಾಸರಗೋಡಿನಲ್ಲಿ ಕೃಷಿಕರಾಗಿದ್ದರು. ಹಳೆಯ ಕಾಲದವರಾಗಿದ್ದರೂ ಪ್ರಗತಿಪರ ಧೋರಣೆ ಹೊಂದಿದ್ದರು. ಅವರ ಕಾಲದಲ್ಲೇ ಮಹಿಳಾ ಸ್ವಾತಂತ್ರ್ಯದ ಕನಸು ಕಂಡಿದ್ದರು. ನನ್ನ ತಂದೆ ಪುಡಿಯಾಪುರ ಅಹಮದ್ ವಕೀಲರಾಗಿದ್ದುಕೊಂಡು ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡಿದ್ದರು. ಏನನ್ನೇ ಆದರೂ ಪ್ರಶ್ನಿಸದೆ ಒಪ್ಪಿಕೊಳ್ಳಬಾರದು ಎಂಬ ಪಾಠ ನನಗೆ ಹೇಳಿಕೊಟ್ಟರು. ನನ್ನನ್ನು ಶಾಲೆಗೆ ಸೇರಿಸಿ ಓದಿಸಿದರು. ಹಾಗಾಗಿ ನಾನು ಪ್ರತಿಯೊಂದನ್ನೂ ಪ್ರಶ್ನಿಸಲು ಆರಂಭಿಸಿದೆ. ಮುಸ್ಲಿಂ ಮಹಿಳೆಗೆ ಪ್ರತಿನಿತ್ಯ ಆಗುವ ಶೋಷಣೆ, ಅವಮಾನಗಳನ್ನು ನನಗೆ ಸಹಿಸಲಾಗಲಿಲ್ಲ. ಅದನ್ನು ಲೇಖನಿಯ ಮೂಲಕ ಬಿಚ್ಚಿಟ್ಟೆ. ನಾನು ಓದಿದ್ದು ಮೆಟ್ರಿಕ್‌ವರೆಗೆ ಮಾತ್ರ (11ನೇ ತರಗತಿ).   ನನ್ನನ್ನು ಮತ್ತಷ್ಟು ಓದಿಸಬೇಕು ಎಂಬ ಆಸೆ ತಂದೆಗೆ ಇತ್ತು. ಆದರೆ ಅಂದಿನ ಸಮಾಜ ಮುಸ್ಲಿಂ ಹೆಣ್ಣು ಮಕ್ಕಳು ಓದುವುದನ್ನು ಸಹಿಸುತ್ತಿರಲಿಲ್ಲ. ಹಾಗಾಗಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಸಿಗಲೇಬೇಕು, ಇದಕ್ಕಾಗಿ ಹೋರಾಡಬೇಕು ಎಂದು ನಾನು ಆಗಲೇ ನಿರ್ಧರಿಸಿಕೊಂಡೆ.”

ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಬೇಕೆಂದು ನಿರಂತರವಾಗಿ ಪ್ರತಿಪಾದಿಸುತ್ತಿದ್ದ ಸಾರಾ ಅಬೂಬಕ್ಕರ್ “ಹೆಣ್ಣು ಮಕ್ಕಳು ಪ್ರಾಣಿಗಳು, ಹೆರಲು ಇರುವ ಯಂತ್ರಗಳು ಎಂದು ಬಿಂಬಿಸಿರುವ ಸಮಾಜ ನಮ್ಮದು. ಇಸ್ಲಾಂನ ಮೂಲದಲ್ಲಿ ಹೆಣ್ಣಿಗೆ ಅಪಾರ ಗೌರವವಿವೆ. ಆದರೆ ಸೌದಿ ಅರೇಬಿಯಾ ಮೂಲದ ‘ವಹಾದಿಸಂ’ ಅನ್ನು ಮುಂದಿಟ್ಟುಕೊಂಡು ಈಗೀಗ ವಿಶ್ವದ ನಾನಾ ಭಾಗಗಳಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬಾರದು ಎಂದೆಲ್ಲಾ ವಾದಿಸುತ್ತಿದ್ದಾರೆ. ಮಹಿಳೆಗೆ ಶಿಕ್ಷಣ ಸಿಗಬೇಕು. ಅದರಲ್ಲೂ ತಾಯಂದಿರಿಗೆ ಅಕ್ಷರ ಜ್ಞಾನ ಬೇಕು. ಆದರೆ ಕೇರಳ, ಕರ್ನಾಟಕ ಕರಾವಳಿ ಭಾಗದ ಬಹುತೇಕ ಮುಸ್ಲಿಂ ಕುಟುಂಬಗಳಲ್ಲಿನ ತಾಯಂದಿರಿಗೆ ಶಿಕ್ಷಣ ಇಲ್ಲ. ಎಲ್ಲೋ ದೂರದ ದುಬೈನಲ್ಲೋ, ಮತ್ತೊಂದೆಡೆಯೋ ಕುಳಿತ ಪತಿ ಹಣ ಕಳುಹಿಸುತ್ತಾನೆ. ಅದನ್ನು ಮಕ್ಕಳು ಮಜಾ ಮಾಡುತ್ತಾರೆ. ಹಣವನ್ನು ಸರಿಯಾಗಿ ನಿರ್ವಹಿಸಲೂ ಬಾರದ ಮಕ್ಕಳು ಕುಟುಂಬ ಸಮೇತ ಹಾಳಾಗಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಹಾಗಾಗಿ ಮಹಿಳೆಯನ್ನು ಶಿಕ್ಷಣದಿಂದ ವಂಚಿಸುವುದು ಸರಿಯಲ್ಲ.” ಎಂದು ಸ್ಪಷ್ಟಪಡಿಸುತ್ತಿದ್ದರು.

ಸಾರಾ ಅಬೂಬಕ್ಕರ್ ಅವರು 2023ರ ಜನವರಿ 10ರಂದು ನಿಧನರಾದರು. ಉದಾತ್ತ ಭಾವಗಳ ಸಂಕೇತಗಳು ಬದುಕಿನಲ್ಲಿ ಎಲ್ಲೆಡೆ ಹಾಳಾಗುತ್ತಿರುವ ಕಾಲದಲ್ಲಿ ಸಾರಾ ಅಬೂಬಕ್ಕರ್ ಅಂತಹ ಜೀವ ನಮಗೆ ಅಪಾರವಾಗಿ ಬೇಕಿತ್ತು.  ಕಾಲನ ದೂತರಿಗೆ ಅದೆಲ್ಲ ಅರ್ಥಾವಾಗುವುದೆಂತು!🥲.  ಅಗಲಿದ ಚೇತನಕ್ಕೆ ಸಾಷ್ಟಾಂಗ ನಮನ🌷🙏🌷

Sara Aboobacker


ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ