ಆಶಾ ರಘು
ಆಶಾ ರಘು
ಆಶಾ ರಘು ಕನ್ನಡದ ಪ್ರಸಿದ್ಧ ಕಾದಂಬರಿಗಾರ್ತಿಯಾಗಿದ್ದವರು.
1979ರ ಜೂನ್ 18, ಆಶಾ ರಘು ಅವರ ಜನ್ಮದಿನ. ತಂದೆ ಕೇಶವ ಅಯ್ಯಂಗಾರ್. ತಾಯಿ ಸುಲೋಚನ. ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದವರು.
ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದ ಆಶಾ ಅವರು ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಮುಂದೆ ಇವರು ಪೂರ್ಣ ಪ್ರಮಾಣದಲ್ಲಿ ಸಾಹಿತ್ಯ ಕೃಷಿಯಲ್ಲಿಯೇ ತಮ್ಮನ್ನು ತಾವು ತೊಡಗಿಸಿಕೊಂಡರು. ಕೆಲವು ವರ್ಷಗಳಿಂದ ಪುಸ್ತಕ ಪ್ರಕಟಣೆ ಕ್ಷೇತ್ರದಲ್ಲಿದ್ದರು.
ಆಶಾ ರಘು ಅವರು 'ಆವರ್ತ', 'ಗತ', 'ಮಾಯೆ', 'ಚಿತ್ತರಂಗ', 'ವಕ್ಷ ಸ್ಥಲ' ಮೊದಲಾದ ಕಾದಂಬರಿಗಳನ್ನೂ, 'ಆರನೇ ಬೆರಳು', 'ಬೊಗಸೆಯಲ್ಲಿ ಕಥೆಗಳು', 'ಅಪರೂಪದ ಪುರಾಣ ಕಥೆಗಳು' ಮೊದಲಾದ ಕಥಾಸಂಕಲನಗಳನ್ನೂ, 'ಚೂಡಾಮಣಿ', 'ಕ್ಷಮಾದಾನ', 'ಬಂಗಾರದ ಪಂಜರ ಮತ್ತು ಇತರ ಮಕ್ಕಳ ನಾಟಕಗಳು' 'ಪೂತನಿ ಮತ್ತಿತರ ನಾಟಕಗಳು' ಮೊದಲಾದ ನಾಟಕ ಕೃತಿಗಳನ್ನು ರಚಿಸಿದ್ದರು. ಇವರ 'ಆವರ್ತ' ಕಾದಂಬರಿಯ ಕುರಿತ ಕೃತಿ 'ಆವರ್ತ-ಮಂಥನ' ಕೂಡಾ ಪ್ರಕಟಗೊಂಡಿದೆ. 'ಹೂಮಾಲೆಯಾದ ಆಂಡಳು' ಅವರ ಮತ್ತೊಂದು ಕೃತಿ.
ಆಶಾ ರಘು ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಪಳಕಳ ಸೀತಾರಾಮಭಟ್ಟ ಪ್ರಶಸ್ತಿ, ರಾಯಚೂರು ಕನ್ನಡ ಸಾಹಿತ್ಯ ಪರಿಷತ್ತಿನ ರಾಜಲಕ್ಷ್ಮಿ ಬರಗೂರು ರಾಮಚಂದ್ರಪ್ಪ ಪ್ರಶಸ್ತಿ, ಅಮ್ಮ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ತ್ರಿವೇಣಿ ದತ್ತಿನಿಧಿ ಪ್ರಶಸ್ತಿ, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 'ಸಾಹಿತ್ಯಾಮೃತ ಸರಸ್ವತಿ' ಬಿರುದು ಸೇರಿದಂತೆ ಅನೇಕ ಗೌರವಗಳು ಸಂದಿದ್ದವು.
ಆಶಾ ರಘು 2026ರ ಜನವರಿ 9ರಂದು ಈ ಲೋಕವನ್ನಗಲಿದರು.
On the birth anniversary of Asha Raghu 🌷🌷🌷

ಕಾಮೆಂಟ್ಗಳು